ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ, ಇಂದು ಒಂದೇ ದಿನ ವಿಜಯಪುರ ಜಿಲ್ಲೆಯ ಇಂಡಿಯಲ್ಲಿ 4,559 ಕೋಟಿ ರೂಪಾಯಿಗಳ ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ, ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಇಂದು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಕ್ತಿ ಯೋಜನೆಯಡಿ 500 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್ಗೆ ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ, ನಂತರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ, ನಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದg ಮುಖ್ಯಮಂತ್ರಿಗಳು, 4,157 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, 401 ಕೋಟಿ ಮೊತ್ತದ ಕಾಮಗಾರಿ ಉದ್ಘಾಟನೆ ಮಾಡಿದ್ದೇನೆ. ಅಭಿವೃದ್ಧಿಯಲ್ಲಿ ನಮ್ಮ ಸರ್ಕಾರದ ಸಾಧನೆಯ ಬಗ್ಗೆ ಜನರೇ ತೀರ್ಮಾನಿಸಲಿ ಎಂದು ನುಡಿದರು.
ಬಿಜಾಪುರ ಜಿಲ್ಲೆ ಮೊದಲು ಹೇಗಿತ್ತು? ನಮ್ಮ ಸರ್ಕಾರದಲ್ಲಿ ಮತ್ತು ಹಿಂದಿನ ಕಾಂಗ್ರೆಸ್ ಸರ್ಕಾರಗಳ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಕ್ರಮಗಳ ಪಟ್ಟಿಯನ್ನು ಕೈಯಲ್ಲಿ ಹಿಡಿದು ನೋಡಿ. ಬಿಜಾಪುರ ಜಿಲ್ಲೆಯಲ್ಲಿ ನೀರಾವರಿ ಈ ಮಟ್ಟಕ್ಕೆ ಅಭಿವೃದ್ಧಿಗೊಳಿಸಿ, ಬರದ ನಾಡಾಗಿದ್ದ ಬಿಜಾಪುರವನ್ನು ಹಸಿರು ನಾಡು ಮಾಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರ ಎಂದು ತಿಳಿಸಿದರು.
ಹಿಂದೆ ಬರಗಾಲ ಬಂದಾಗ ಜನ ನಿಂಬೆ ಗಿಡ ಕಿತ್ತು ಹಾಕುತ್ತಿದ್ದರು. ಅದೇ ದಿನ ನಾನು ಇಂಡಿಗೆ ಬಂದಿದ್ದೆ. ನಿಂಬೆ ಬೆಳೆಗಾರರಿಗೆ ಭರವಸೆ ನೀಡಿದ್ದೆ. ಇಂದು ನಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನ ಬಿಡುಗಡೆ ಮಾಡಿ ನುಡಿದಂತೆ ನಡೆಯುವ ಕಾಂಗ್ರೆಸ್ಸಿನ ಪರಂಪರೆಯನ್ನು ಮುಂದುವರೆಸಿದ್ದೇವೆ ಎಂದರು.
500 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿರುವುದು, 1.23 ಕೋಟಿ ಕುಟುಂಬಗಳು ಗೃಹಲಕ್ಷ್ಮಿ ಹಣ ಪಡೆದಿರುವುದು, 1.64 ಕೋಟಿ ಮನೆಗಳಿಗೆ ಉಚಿತವಾಗಿ 200 ಯೂನಿಟ್ ಹಣ ಪಡೆಯುತ್ತಿರುವುದು, ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳ ಮೂಲಕ ಕೋಟಿ ಕೋಟಿ ಕನ್ನಡಿಗರ ಬದುಕಿಗೆ ನೆರವಾಗಿರುವುದು ಅಭಿವೃದ್ಧಿ ಅಲ್ಲವೇ? ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಗ್ಯಾರಂಟಿಗಳಲ್ಲದೆ 83 ಸಾವಿರ ಕೋಟಿ ರೂಪಾಯಿ ಹಣ ಅಭಿವೃದ್ಧಿಗೆ ತೆಗೆದಿಟ್ಟುರುವುದು ನಮ್ಮ ಅಭಿವೃದ್ಧಿ ಪರವಾದ ಆಡಳಿತಕ್ಕೆ ಸ್ಪಷ್ಟ ನಿದರ್ಶನ. ಅಭಿವೃದ್ಧಿ ಯೋಜನೆಗಳು ನಿಮ್ಮ ಕಣ್ಣೆದುರೇ ಕಾಣುತ್ತಿವೆ ಎಂದು ಹೇಳಿದರು.
ಸ್ಥಳೀಯ ಶಾಸಕರಾದ ಯಶವಂತರಾಯಗೌಡ ಪಾಟೀಲ್ ಅವರಿಗೆ ಸರ್ಕಾರದಿಂದ ಹಣ ತಂದು ಕ್ಷೇತ್ರದ ಅಭಿವೃದ್ಧಿ ಮಾಡುವುದು ಹೇಗೆ ಎನ್ನುವುದರಲ್ಲಿ ಬಹಳ ಪ್ರಾಮಾಣಿಕರು ಮತ್ತು ಚಾಣಾಕ್ಷರು. ನಮ್ಮದು ಸರ್ವರ ಅಭಿವೃದ್ಧಿಗೆ ಬದ್ದವಾಗಿರುವ ಸರ್ಕಾರ ಎಂದರು.
ಸ್ಥಳೀಯ ಶಾಸಕರಾದ ಯಶವಂತರಾಯಗೌಡ ಪಾಟೀಲ್ ಅವರ ಅಧ್ಯಕ್ಷತೆಯ ಸಮಾರಂಭದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಸಚಿವರಾದ ಹೆಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಎಂ.ಬಿ.ಪಾಟೀಲ್, ಹೆಚ್.ಕೆ.ಪಾಟೀಲ್, ಶಿವಾನಂದ ಎಸ್.ಪಾಟೀಲ್, ಶರಣಪ್ರಕಾಶ ಪಾಟೀಲ್ ಸೇರಿದಂತೆ ಹಲವು ಮಂದಿ ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.