ಬಯೋಕಾನ್ (Biocon) ಮುಖ್ಯಸ್ಥೆ ಕಿರಣ್ ಮಜುಂದಾರ್ (Kiran Majumdar) ಬಗ್ಗೆ ಡಿ.ಕೆ. ಶಿವಕುಮಾರ್ (DK Shivakumar) ವಾಗ್ದಾಳಿಯ ಬಗ್ಗೆ ಆಮ್ ಆದ್ಮಿ (AAP) ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ (Seetharam Gundappa) ಇಂದಿಲ್ಲಿ ಮಾತನಾಡುತ್ತಾ ” ಬೆಂಗಳೂರು ಸಿಲಿಕಾನ್ ನಗರ ವೆಂದು ಖ್ಯಾತಿಗೊಳ್ಳಲು ಇಲ್ಲಿನ ಐಟಿ ಉದ್ಯಮಿಗಳ ಕೊಡುಗೆ ಸಾಕಷ್ಟು ಮಟ್ಟದಲ್ಲಿದೆ. ದೇಶಕ್ಕೆ ಎರಡನೇ ಅತಿ ದೊಡ್ಡ ತೆರಿಗೆಯನ್ನು ನೀಡುವ ಹಾಗೂ ದೇಶದ ಆರ್ಥಿಕ ಇಂಜಿನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ಐಟಿ ಉದ್ಯಮಗಳು, ಇಲ್ಲಿನ ಉದ್ಯೋಗಿಗಳು ಹಾಗೂ ಅವರಿಗೆ ಪೂರಕವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಅನೇಕ ಕಂಪನಿಗಳು ಪ್ರಮುಖ ಕಾರಣವಾಗಿವೆ. ಈ ಕನಿಷ್ಠ ಜ್ಞಾನವು ಇಲ್ಲದ ಬೆಂಗಳೂರು ನಗರಾಭಿವೃದ್ಧಿಯ ಹೊಣೆಯನ್ನು ಹೊತ್ತಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರ ಇತ್ತೀಚಿನ ದುರ್ವರ್ತನಕಾರಿ ಹೇಳಿಕೆಗಳಿಂದಾಗಿ ಏಷ್ಯಾದ ಅತಿ ದೊಡ್ಡ ಹೂಡಿಕೆಯಾದ ಗೂಗಲ್ ಸಂಸ್ಥೆಯ ಕೃತಕ ಬುದ್ಧಿಮತ್ತೆಯ ಡೇಟಾ ಮೈನಿಂಗ್ ಕೇಂದ್ರವು ವಿಶಾಖಪಟ್ಟಣದ ಪಾಲಾಗಿದೆ. ಈ ರೀತಿಯ ನಡೆಯಿಂದಾಗಿ ಬೆಂಗಳೂರಿನ ಸಮಗ್ರ ಅಭಿವೃದ್ಧಿ ಕುಂಠಿತಗೊಳ್ಳುವುದು ನಿಸ್ಸಂದೇಹ” ಕಳವಳ ವ್ಯಕ್ತಪಡಿಸಿದರು.
“ಕಳೆದೆರಡು ದಶಕಗಳಿಂದ ಆಳಿರುವ ಮೂರೂ ಪಕ್ಷಗಳು ಬೆಂಗಳೂರಿಗರಿಗೆ ಕನಿಷ್ಠ ಮೂಲಸೌಕರ್ಯಗಳನ್ನು ನೀಡಲು ವಿಫಲವಾಗಿವೆ. ಬೆಂಗಳೂರಿನ ಮೂಲಭೂತ ಸೌಕರ್ಯದ ನೆಪದಲ್ಲಿ ಸಾವಿರಾರು ಕೋಟಿ ರೂ.ಗಳನ್ನು ಕೊಳ್ಳೆಹೊಡೆಯುವ ಮಾರ್ಗಗಳನ್ನು ಹುಡುಕಿಕೊಂಡಿದ್ದಾರೆ. ಇತ್ತೀಚೆಗೆ ಬಿಜೆಪಿ ಸರ್ಕಾರದ 40% ಕಮಿಷನ್ ಆರೋಪ ಮಾಡಿಕೊಂಡೆ ಬಂದ ಕಾಂಗ್ರೆಸ್ ಪಕ್ಷವು ಸಹ ಯಾವುದೇ ತನಿಖೆಯನ್ನು ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆಯನ್ನು ನೀಡುವುದನ್ನು ಬಿಟ್ಟು ತಾವೇ 60% ಕಮಿಷನ್ ದಂಧೆಗೆ ಇಳಿದಿರುವುದೇ ಇಷ್ಟೆಲ್ಲ ಅನಾಹುತಕ್ಕೆ ಕಾರಣಗಳಾಗಿವೆ” ಎಂದು ಆರೋಪಿಸಿದರು.
” ಇಂತಹ ಸಂದರ್ಭದಲ್ಲಿ ಡಿಕೆಶಿ ಯ ದುರಹಂಕಾರಿ ಹೇಳಿಕೆಗಳು ಇಲ್ಲಿನ ಐಟಿ ಉದ್ಯಮಿಗಳು ಬೆಂಗಳೂರನ್ನು ಬಿಡುವಂತೆ ಪ್ರಚೋದಿಸುತ್ತದೆ. ಉದ್ಯಮಿಗಳಿಗೆ ಪೂರಕವಾದಂತಹ ಉತ್ತಮ ರಸ್ತೆ , ನೀರು, ಒಳಚರಂಡಿ , ಸಂಚಾರ ವ್ಯವಸ್ಥೆಯಂತಹ ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸುವುದನ್ನು ಬಿಟ್ಟು ಪ್ರತಿದಿನವೂ ಈ ರೀತಿಯ ದುರಂಕಾರಿ ಮಾತುಗಳನ್ನು ಬೆಂಗಳೂರಿಗರು ಸಹಿಸಲು ಸಾಧ್ಯವಿಲ್ಲ. ಈಗಾಗಲೇ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ಅದರಲ್ಲೂ ಕನ್ನಡಿಗ ಐಟಿ ಉದ್ಯೋಗಿಗಳಿಗೆ ಆತಂಕದ ಪರಿಸ್ಥಿತಿ ಇದೆ. ಇಂಥ ಸೂಕ್ಷ್ಮಗಳನ್ನು ಅರಿತು ಮುಖ್ಯಮಂತ್ರಿಗಳು ಈತನ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು ” ಎಂದು ಸೀತಾರಾಮ್ ಗುಂಡಪ್ಪ ಅಗ್ರಹಿಸಿದರು.





















