ಬೆಂಗಳೂರು: ಕಳೆದ ಕೆಲವು ತಿಂಗಳಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆ ಕುರಿತು ತೀವ್ರ ಚರ್ಚೆ ನಡೆಯುತ್ತಿದೆ. ಜುಲೈ ಮೊದಲ ವಾರದಲ್ಲಿ ನೂತನ ಅಧ್ಯಕ್ಷರ ಹೆಸರು ಘೋಷಣೆಯಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಕಮಲ ಪಾಳಯದಲ್ಲಿ ಭಾರೀ ಕುತೂಹಲ ಮೂಡಿದೆ. ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಹಲವು ಪ್ರಮುಖ ನಾಯಕರ ಹೆಸರುಗಳು ಚರ್ಚೆಯಲ್ಲಿದ್ದು, ಅವುಗಳಲ್ಲಿ ಕರ್ನಾಟಕದ ಒಬ್ಬ ಹಿರಿಯ ರಾಜಕಾರಣಿಯ ಹೆಸರು ಕೇಳಿಬರುತ್ತಿದೆ.
ಕರ್ನಾಟಕದಿಂದ ಒಬ್ಬ ಕನ್ನಡಿಗನಿಗೆ ಈ ಉನ್ನತ ಸ್ಥಾನ ಒಲಿಯುವ ಸಾಧ್ಯತೆಯ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕದ ನಾಯಕನಿಗೆ ಈ ಪಟ್ಟವನ್ನು ನೀಡಲು ಒಲವು ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಕನ್ನಡಿಗ ಯಾರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ರಾಜ್ಯ ಬಿಜೆಪಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ಕೆಲವರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಕನ್ನಡಿಗನೊಬ್ಬನನ್ನು ಆಯ್ಕೆ ಮಾಡುವ ಕುರಿತು ಹೈಕಮಾಂಡ್ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿದೆ.
ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೆ ಸವಾಲಿನ ಕಗ್ಗಂಟಾಗಿದೆ. ಕಳೆದ ನಾಲ್ಕೈದು ತಿಂಗಳಿಂದ ಈ ಸ್ಥಾನಕ್ಕೆ ಸೂಕ್ತ ವ್ಯಕ್ತಿಯ ಆಯ್ಕೆಗೆ ತೀವ್ರ ಕಸರತ್ತು ನಡೆಯುತ್ತಿದೆ. ಈ ರೇಸ್ನಲ್ಲಿ ಹಲವು ಪ್ರಭಾವಿ ನಾಯಕರ ಹೆಸರುಗಳು ಕೇಳಿಬಂದಿವೆ. ಇದರ ಜೊತೆಗೆ, ಆರ್ಎಸ್ಎಸ್ನ ಪಾತ್ರವೂ ಈ ಆಯ್ಕೆಯಲ್ಲಿ ನಿರ್ಣಾಯಕವಾಗಿದೆ. ಬಿಜೆಪಿಯ ಈ ಪ್ರಮುಖ ಆಯ್ಕೆಗೆ ಆರ್ಎಸ್ಎಸ್ನ ಸಲಹೆ ಮತ್ತು ಸಮ್ಮತಿಯನ್ನು ಪಡೆಯಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ
ಈಗಾಗಲೇ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ 11 ಆಕಾಂಕ್ಷಿಗಳ ಪಟ್ಟಿ ಸಿದ್ಧವಾಗಿದೆ. ಈ ಪಟ್ಟಿಯಲ್ಲಿ ಕರ್ನಾಟಕದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ. ಜೋಶಿ ಅವರು ಆರ್ಎಸ್ಎಸ್ನ ಹಿನ್ನೆಲೆಯಿಂದ ಬಂದವರಾಗಿದ್ದು, ಸಂಘ ಪರಿವಾರದಲ್ಲಿ ತಮ್ಮನ್ನು ತಾವು ಗಾಢವಾಗಿ ತೊಡಗಿಸಿಕೊಂಡಿದ್ದಾರೆ. ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿದ್ದು, ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಆರ್ಎಸ್ಎಸ್ನೊಂದಿಗೆ ಅವರ ಹತ್ತಿರದ ಸಂಬಂಧವು ಈ ಸ್ಥಾನಕ್ಕೆ ಅವರನ್ನು ಪ್ರಬಲ ಆಕಾಂಕ್ಷಿಯಾಗಿಸಿದೆ. ಜುಲೈ 7ರಂದು ನೂತನ ರಾಷ್ಟ್ರೀಯ ಅಧ್ಯಕ್ಷರ ಹೆಸರು ಘೋಷಣೆಯಾಗುವ ಸಾಧ್ಯತೆಯಿದೆ.
Veekay News > India News > ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಕನ್ನಡಿಗನಿಗೆ ಪಟ್ಟ ಕಟ್ಟುತ್ತಾ ಬಿಜೆಪಿ
ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಕನ್ನಡಿಗನಿಗೆ ಪಟ್ಟ ಕಟ್ಟುತ್ತಾ ಬಿಜೆಪಿ
ವೀ ಕೇ ನ್ಯೂಸ್26/06/2025
posted on
