ಗಣಿಗಾರಿಕೆಯಲ್ಲಿ ನಡೆದ ಅಕ್ರಮಗಳ ಕುರಿತು ತೆಗೆದುಕೊಳ್ಳಬೇಕಾದ ಕ್ರಮಗಳ, ಮುಖ್ಯವಾಗಿ ವಸೂಲಾತಿ ಆಯುಕ್ತರನ್ನು ನೇಮಕಾತಿ ಮಾಡುವ ಕುರಿತು ಹಾಗೂ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ತೀವ್ರಗತಿ ನ್ಯಾಯಾಲಯ ಸ್ಥಾಪಿಸುವ ಬಗ್ಗೆ ಚರ್ಚಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡಲು ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದೆ.
ಉಪ ಸಮಿತಿಯ ಅಧ್ಯಕ್ಷರಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ, ಸದಸ್ಯರುಗಳನ್ನಾಗಿ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್.ಮುನಿಯಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಅರಣ್ಯ ಮತ್ತು ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಅವರನ್ನು ನೇಮಿಸಲಾಗಿದೆ.
ಕರ್ನಾಟಕ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು, 1977 ರ ನಿಯಮ 13 (5) ಪ್ರಕಾರ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ (ಗಣಿ)ಯು ಈ ಸಚಿವ ಸಂಪುಟ ಉಪಸಮಿತಿಗೆ ಅಗತ್ಯ ನೆರವು ನೀಡುವುದು. ಉಪಸಮಿತಿಯು ತನ್ನ ವರದಿಯನ್ನು ಒಂದು ತಿಂಗಳ ಒಳಗಾಗಿ ನೀಡುವುದು ಎಂದು ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.