ಬೆಂಗಳೂರು,ಜು.13; ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಮತ್ತವರ ಕುಟುಂಬ ಸದಸ್ಯರ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಮಾಡಿದೆ.
ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ ಮತ್ತು ಪ್ರಕರಣ ಕುರಿತ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಈಶ್ವರಪ್ಪ, ಅವರ ಪುತ್ರ ಕೆ ಇ ಕಾಂತೇಶ್ ಮತ್ತು ಸೊಸೆ ಶಾಲಿನಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್ ಆರ್ ಕೃಷ್ಣ ಕುಮಾರ್ ಅವರ ಏಕಸದಸ್ಯ ಪೀಠ ನಡೆಸಿತು. ಪ್ರಕರಣಕ್ಕೆ ತಡೆ ನೀಡಿದ ನ್ಯಾಯಾಲಯವು ಲೋಕಾಯುಕ್ತ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆ ಮುಂದೂಡಿತು. ಈಶ್ವರಪ್ಪ ಪರ ವಕೀಲ ವಿನೋದ್ ಕುಮಾರ್ ವಕಾಲತ್ತು ವಹಿಸಿದ್ದಾರೆ.
ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 2006ರಲ್ಲಿ ರಾಜ್ಯ ಜಲಸಂಪನ್ಮೂಲ ಸಚಿವರಾದ ನಂತರ ಶಿವಮೊಗ್ಗದಲ್ಲಿ ತಮ್ಮ ಪುತ್ರ ಕೆ ಇ ಕಾಂತೇಶ್ ಮತ್ತು ಸೊಸೆ ಶಾಲಿನಿ ಅವರು ಹೆಸರಿನಲ್ಲಿ ಕೋಟ್ಯಂತರ ಬೆಲೆ ಬಾಳುವ ಚರ ಮತ್ತು ಸ್ಥಿರಾಸ್ತಿ ಖರೀದಿಸಿದ್ದಾರೆ. ಅಲ್ಲದೆ, ಈ ಮೂವರು ಜಂಟಿಯಾಗಿ ಹಲವು ಶೈಕ್ಷಣಿಕ ಸಂಸ್ಥೆಗಳು, ಕೈಗಾರಿಕೆಗಳು, ಆಟೋ ಮೊಬೈಲ್ ಶೋರೂಂಗಳನ್ನು ನಡೆಸುತ್ತಿದ್ಧಾರೆ.ಈ ಶ್ವರಪ್ಪ ಶಾಸಕರಾಗುವ ಮುನ್ನ 2006ರಲ್ಲಿ ಸಚಿವರಾದ ನಂತರ ಕೇವಲ ಮೂರೂವರೆ ವರ್ಷದಲ್ಲಿ ಶೇ.100ರಷ್ಟು ಅಧಿಕ ಆಸ್ತಿ ಸಂಪಾದನೆ ಮಾಡಿದ್ದಾರೆ. ಆದ್ದರಿಂದ, ಭ್ರಷ್ಟಾಚಾರ ನಿಗ್ರಹ ಕಾಯಿದೆ ಅಡಿಯಲ್ಲಿ ಭ್ರಷ್ಟಚಾರ, ಅಕ್ರಮ ಆಸ್ತಿ ಸಂಪಾದನೆ ಮತ್ತು ಅಧಿಕಾರ ದುರುಪಯೋಗ ಆರೋಪದ ಮೇಲೆ ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಆದೇಶಿಸುವಂತೆ ಕೋರಿ ವಕೀಲ ಬಿ ವಿನೋದ್ 2021ರಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಿ ವಿನೋದ್ ಅವರ ದೂರು ಆಧರಿಸಿ ಭ್ರಷ್ಟಾಚಾರ ನಿಗ್ರಹ ಕಾಯಿದೆ-1988ರ ಸೆಕ್ಷನ್ 13(1)(ಡಿ) (ಅಕ್ರಮ ಸಂಪಾದನೆಗೆ ಅಧಿಕಾರ ದುರ್ಬಳಕೆ ) ಹಾಗೂ 13(1)(ಇ) ಮತ್ತು ಭಾರತೀಯ ದಂಡ ಸಂಹಿತೆ ಸೆಕ್ಷನ್ 420ರ (ವಂಚನೆ), ಸೆಕ್ಷನ್ 120-ಬಿ (ಅಪರಾಧಿಕ ಒಳಸಂಚು) ಅಡಿ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗೆ 2025ರ ಏಪ್ರಿಲ್ 5ರಂದು ಆದೇಶಿಸಿತ್ತು.